ದಿಲ್ಲಿಯಲ್ಲಿ ಗೌಡರ ಗದ್ದಲ: ನೈಸ್ ಯೋಜನೆ ವಿರುದ್ಧ ಮೊಳಗಿದ ರೈತರ ಕಹಳೆ |
ಪ್ರಕಟಿಸಿದ ದಿನಾಂಕ : 2010-03-11
 ಹೊಸದಿಲ್ಲಿ, ಮಾ.೧೦: ನೈಸ್ ಸಂಸ್ಥೆಯ ಬಿಎಂಐಸಿ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂ. ಅವ್ಯವಹಾರದ ಕುರಿತು ಕೇಂದ್ರ ಸರಕಾರದ ಗಮನ ಸೆಳೆಯಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಾವಿರಾರು ರೈತರು ದೆಹಲಿಯ ಜಂತರ್-ಮಂತರ್ ಬಳಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಡಿ.ದೇವೇಗೌಡ, ನೈಸ್ ರಸ್ತೆ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ರಾಜ್ಯ ಸರಕಾರ ಮುಂದಾಗಿರುವುದು ತೀವ್ರ ಖಂಡನೀಯ ಎಂದು ಕಿಡಿಕಾರಿದರು.
ನೆಸ್ ಸಂಸ್ಥೆಯಲ್ಲಿ ಸಾವಿರಾರು ಕೋಟಿ ರೂ.ಗಳ ವಂಚನೆ ನಡೆದಿದೆ. ಈ ಯೋಜನೆಗೆ ಹೆಚ್ಚುವರಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದು, ರೈತರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ, ಕೇಂದ್ರ ಸರಕಾರವು ಮಧ್ಯಪ್ರವೇಶಿಸಿ ಯೋಜನೆಯನ್ನು ಸಿಬಿಐಗೆ ತನಿಖೆಗೊಳಪಡಿಸಬೇಕು ಎಂದು ದೇವೇಗೌಡ ಆಗ್ರಹಿಸಿದರು.
ರೈತರು ಹೆಚ್ಚುವರಿ ಭೂ ಸ್ವಾಧೀನದ ವಿರುದ್ಧ ಹಲವಾರು ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು. ರಾಜ್ಯ ಸರಕಾರ ಎಚ್ಚೆತ್ತುಕೊಂಡಿಲ್ಲ. ಆದ್ದರಿಂದಲೆ, ಈ ಸಂಬಂಧ ಕೇಂದ್ರ ಸರಕಾರದ ಗಮನ ಸೆಳೆಯಲು ದೆಹಲಿಯಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.
ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಹೊರತು ಪಡಿಸಿ ಹೆಚ್ಚುವರಿಯಾಗಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಬಾರದು ಎಂದು ಒತ್ತಾಯಿಸಿದ ಅವರು, ನೈಸ್ ಅವ್ಯವಹಾರಗಳ ಕುರಿತು ಸಂಸತ್ತಿನಲ್ಲೂ ಪ್ರಸ್ತಾಪಿಸಲಾಗುವುದು ಎಂದರು.

ರಸ್ತೆ ಮಾಡುವ ನೆಪದಲ್ಲಿ ನೈಸ್ ಸಂಸ್ಥೆ ಬಡವರು ಹಾಗೂ ರೈತರ ಭೂಮಿಯನ್ನು ನುಂಗುತ್ತಿದೆ. ಇದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲವಾಗಿ ನಿಂತಿದೆ. ಈ ಯೋಜನೆಯಡಿಯಲ್ಲಿ ರಿಯಲ್ ಎಸ್ಟೇಟ್ ಧಂದೆ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಸರಕಾರಿ ಹಾಗೂ ರೈತರ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಹೆಚ್ಚುವರಿ ಭೂ ಸ್ವಾಧೀನ ಮೂಲಕ ಕೃಷಿಯೋಗ್ಯ ರೈತರ ಭೂಮಿಯನ್ನು ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯಂತಹ ಧನಿಕರ ಪಾಲು ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ರೈತರ ಸಮಾಧಿಯ ಮೇಲೆ ಅರಮನೆಗಳನ್ನು ನಿರ್ಮಿಸಿಕೊಡಲು ತಾನು ಅವಕಾಶ ನೀಡುವುದಿಲ್ಲ ದೇವೇಗೌಡ ಎಚ್ಚರಿಕೆ ನೀಡಿದರು.
ನೈಸ್ ಅವ್ಯವಹಾರದ ಕುರಿತು ಪ್ರಧಾನಮಂತ್ರಿ ಡಾ.ಮನಮೋಹನ್ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾಸ್ವರಾಜ್ ಸೇರಿದಂತೆ ಎಲ್ಲ ಪಕ್ಷಗಳ ರಾಷ್ಟ್ರೀಯ ಮುಖಂಡರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.
ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಮಾತನಾಡಿ, ರೈತರ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರೆಯಲಿದೆ. ಸರಕಾರಗಳು ತಮ್ಮ ಇಷ್ಟ ಬಂದಂತೆ ರೈತರ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಭೂ ಸ್ವಾಧೀನ ಕುರಿತು ಜಾರಿಯಲ್ಲಿರುವ ಬ್ರಿಟೀಷರ ಕಾಲದ ಕಾನೂನನ್ನು ಅನುರ್ಜಿತಗೊಳಿಸಿ, ನೂತನ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ. ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ಸಂಸತ್ತಿನ ಒಳಗೆ ಹಾಗೂ ಹೊರಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.
ಕೋಡಿಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆ: ರೈತ ಸಂಘದ ಕಾರ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿಯೂ ಸುಮಾರು ೬೦ ರೈತರು ದೆಹಲಿಯಲ್ಲಿ ನೈಸ್ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಭೂಮಿಯನ್ನು ಹೆಚ್ಚುವರಿಯಾಗಿ ಸ್ವಾಧೀನ ಪಡಿಸಿಕೊಂಡು ದೊಡ್ಡ-ದೊಡ್ಡ ಟೌನ್ಷಿಪ್ಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇದರಿಂದ ರಿಯಲ್ ಎಸ್ಟೇಟ್ ಧಂದೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ, ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ರೈತರ ಹಿತ ಕಾಪಾಡುವಂತೆ ಮನವಿ ಮಾಡಿದರು.
ನೈಸ್ ಯೋಜನೆಯ ವಂಚನೆ; ರಾಷ್ಟ್ರಾಧ್ಯಕ್ಷರಿಗೆ ಮನವರಿಕೆ: ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್ರನ್ನು ಮಧ್ಯಾಹ್ನ ೧೨.೩೦ಕ್ಕೆ ಭೇಟಿ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ನಿಯೋಗವು ಬಿಎಂಐಸಿ ಯೋಜನೆ ನಡೆದು ಬಂದ ದಾರಿ, ನೈಸ್ ಸಂಸ್ಥೆಯಿಂದ ರೈತರಿಗಾಗುತ್ತಿರುವ ಅನ್ಯಾಯಗಳು ಮೊದಲಾದ ವಿವರಗಳನ್ನು ಮನವರಿಕೆ ಮಾಡಿ, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ಸೂಚಿಸುವಂತೆ ಮನವಿ ಮಾಡಿತು.
ಪ್ರತಿಭಟನೆಯಲ್ಲಿ ತೃತೀಯ ರಂಗದ ನಾಯಕರು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಶರದ್ಯಾದವ್, ಸಿಪಿಐ ಮುಖಂಡ ಎ.ಬಿ.ಬರ್ಧನ್, ಡಿ.ರಾಜಾ, ರಾಷ್ಟ್ರೀಯ ಅಕಾಲಿದಳದ ಮುಖಂಡ ಅಜಿತ್ ಸಿಂಗ್, ಸಂಸದ ಎನ್.ಚಲುವರಾಯಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಶಾಸಕ ಕೃಷ್ಣಪ್ಪ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.
| |
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-11
|
|
|