
ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ
Thursday, August 6, 2020
(ಗಲ್ಫ್ ಕನ್ನಡಿಗ) ಕೊರೊನಾ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
(ಗಲ್ಫ್ ಕನ್ನಡಿಗ) ಅವರು ಗುರುವಾರ ಕೊರೊನಾ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರ ಸಂದರ್ಭದಲ್ಲಿ ಈ ವಿಚಾರ ತಿಳಿಸಿದ್ದಾರೆ.
(ಗಲ್ಫ್ ಕನ್ನಡಿಗ) ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.
(ಗಲ್ಫ್ ಕನ್ನಡಿಗ)ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.
(ಗಲ್ಫ್ ಕನ್ನಡಿಗ)ಸಭೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಶಾಸಕ ಡಾ. ಭರತ್ ಶೆಟ್ಟಿ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ ಲಾಕ್ ಅಧೀಕ್ಷಕ ಡಾ. ಸದಾಶಿವ, ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ. ಉದಯಕುಮಾರ್ ಮತ್ತಿತರರು ಇದ್ದರು.