ಗದಗ ಮಹಿಳಾ PSI ಯೊಬ್ಬರ ಮಗಳ ಪ್ರೇಮ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಪೋಷಕರಿಂದ ಪ್ರಾಣಭಯ ಇದೆ, ನಮಗೆ ರಕ್ಷಣೆ ನೀಡಿ ಅಂತ ಗದಗ ಎಸ್ಪಿ ಯತೀಶ್ ಎನ್. ಅವರ ಬಳಿ ರಕ್ಷಣೆ ಕೋರಿ ಬಂದಿದ್ದ ಪ್ರೇಮಿಗಳು ಇನ್ಮುಂದೆ ಭಯವಿಲ್ಲದೆ ಬಾಳ ಪಯಣ ಆರಂಭಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಏಳು ವರ್ಷಗಳಿಂದ ಪ್ರೀತಿಸುತ್ತಿದ್ದ ಮೇಘಾ ಮತ್ತು ಕೀರ್ತಿನಾಥ ಜೋಡಿ, ಆದರೆ ಮನೆಯಲ್ಲಿ ಪ್ರೀತಿಗೆ ಒಪ್ಪದ ಕಾರಣ ಆರು ತಿಂಗಳ ಹಿಂದೆಯೇ ಮನೆಬಿಟ್ಟು ಹೋಗಿ ಮುಂಡರಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದರು. ಈ ವಿಚಾರ ಅವರ ತಂದೆ ತಾಯಿಗೆ ಗೊತ್ತಾಗಿ ಬೆದರಿಕೆ ಹಾಕಿದ್ದರು ಎಂದು ಮೇಘಾ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಹಾಗಾಗಿ ಬಳಿಕ ಎಸ್.ಪಿ ಯತೀಶ್ ಅವರು ಯುವತಿಯ ತಂದೆ ತಾಯಿಯನ್ನು ತಮ್ಮ ಕಚೇರಿಗೆ ಕರೆಯಿಸಿ ಮಾತನಾಡಿಸಿ ಅವರ ಮನವೊಲಿಸಿದ್ದಾರೆ. ಈ ವೇಳೆ ನಾವು ಬೆದರಿಕೆ ಹಾಕಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.ತಂದೆ-ತಾಯಿಯ ಆಸ್ತಿಗೆ ಆಸೆ ಪಡುವುದಿಲ್ಲ ಅಂತ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದಾರೆ. ಹಾಗೆ ಪೋಷಕರು ಕೂಡ ಮಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇಬ್ಬರ ಒಪ್ಪಂದದಂತೆ ಪ್ರಕರಣ ಸದ್ಯ ಸುಖಾಂತ್ಯ ಕಂಡಿದೆ.