ಬೆಂಗಳೂರು: ಪ್ರೀತಿಸಲು ಒಪ್ಪದ ಯುವತಿಯನ್ನು ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ
ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದಲ್ಲಿ ನಡೆದಿದೆ.
ಯುವತಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಆಕೆಯನ್ನು ಅಡ್ಡಗಟ್ಟಿ ಉದಯ್ ಎಂಬಾತ ಚಾಕುವಿನಿಂದ ಯುವತಿಯ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಬಲವಾಗಿ ಇರಿದು ಕೊಲೆಗೆ ಯತ್ನಿಸಿದ್ದಾನೆ.
ಕಳೆದ ಮೂರು ವರ್ಷದಿಂದ ಯುವತಿ ಜೊತೆ ಗೆಳೆತನ ಹೊಂದಿದ್ದ ಉದಯ್, ಇತ್ತೀಚೆಗೆ ಲವ್ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ, ಯುವತಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕುಪಿತಗೊಂಡಿದ್ದ ಉದಯ್, ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ, ಆತ ಕೂಡ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.