
ಸಿಎಂ ಬೊಮ್ಮಾಯಿ, ಸಚಿವ ಸುನಿಲ್ ವಿರುದ್ದ ಪ್ರಣಾವನಂದ ಸ್ವಾಮೀಜಿ ವಾಗ್ದಾಳಿ.. ಯಾಕೆ? ವಿಡಿಯೋ ನೋಡಿ
Wednesday, September 21, 2022
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಬಿಲ್ಲವ ಸಮುದಾಯಕ್ಕೆ ವಂಚನೆ ಎಸಗಿದ್ದಾರೆ ಎಂದು ಕಲಬುರಗಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು ನಿಗಮ ಮಂಡಳಿ ಸ್ಥಾಪನೆ ಮಾಡದೆ ಕೇವಲ 5 ಕೋಟಿ ರೂ. ಅನುಮಾನದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುತ್ತೇವೆ ಎಂದು ಸರಕಾರ ಹೇಳಿ ಈಡಿಗ ಬಿಲ್ಲವ ಸಮುದಾಯಕ್ಕೆ ವಂಚನೆ ಮಾಡಲಾಗಿದೆ. ಸಚಿವ ಸುನಿಲ್ ಕುಮಾರ್ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಸಮುದಾಯವನ್ನು ಸಂಪೂರ್ಣವಾಗಿ ದಾರಿ ತಪ್ಪಿಸಿ, ಬಿಲ್ಲವ ಸಮುದಾಯವನ್ನು ಬಲಿ ಕೊಡುತ್ತಿದ್ದಾರೆ. ಅವರಿಗೆ ಯಾಕೆ 500 ಕೋಟಿ ರೂ. ಅನುದಾನದಲ್ಲಿ ನಿಗಮ ಮಂಡಳಿ ಸ್ಥಾಪಿಸಲು ಸಾಧ್ಯವಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಬಿಲ್ಲವ ಸಮುದಾಯದ ಪ್ರತಿಯೊಂದು ಮನೆಗೂ ತೆರಳಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದೇವೆ. ಮುಂದಿ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ದ.ಕ.ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಪಕ್ಷ ಮೂರು ಮಂದಿ ಅಭ್ಯರ್ಥಿಗಳಿಗಾದರೂ ಟಿಕೆಟ್ ನೀಡಬೇಕು. ಬಿಲ್ಲವ ಸಮುದಾಯವನ್ನು ರಾಜಕೀಯವಾಗಿ ಬಳಸುವುದನ್ನು ನಾವು ಸಹಿಸುವುದಿಲ್ಲ. ಬಿಜೆಪಿಯ ನೇತಾರರ ದಾಸರಾಗಿ ಬಿಲ್ಲವ ಸಮುದಾಯದ ಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರವೀಣ್ ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಕೊಡುವ ಬದಲು ಖಾಯಂ ಉದ್ಯೋಗ ನೀಡಲಿ. ನಾರಾಯಣ ಗುರುಗಳ ಹೆಸರನ್ನು ಮೆಟ್ರೋ, ಬಸ್ ತಂಗುದಾಣಕ್ಕೆ ಇಡುವ ಬದಲು ವಿಧಾನಸಭೆಯ ಅಂಗಣದಲ್ಲಿ ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲಿ. ಇವರಿಗೆ ಬಿಲ್ಲವ, ಈಡಿಗ ಸಮುದಾಯದ ಕೋಟ, ಓಟು ಬೇಕು ಬಿಲ್ಲವರು, ಈಡಿಗರು ಬೇಡ. ಸ್ವತಂತ್ರ ಭಾರತದಲ್ಲಿ ಹಿಂದುಳಿದ ವರ್ಗದ ಸಮುದಾಯದ ಮಂದಿ ಅತಂತ್ರರಾಗಿ ಬದುಕುತ್ತಿದ್ದು ನಾನು ಮುಂದಿನ ದಿನಗಳಲ್ಲಿ ವಿಧಾನಸಭೆಗೆ ಪಾದಯಾತ್ರೆ ಮಾಡುವ ಬಗ್ಗೆ ನಿರ್ಧರಿಸಲಿದ್ದೇನೆ. ಅಲ್ಲದೆ ದ.ಕ.ಜಿಲ್ಲೆಯ ಎಲ್ಲಾ ಬಿಲ್ಲವ ಸಂಘಟನೆಗಳ ಮೂಲಕ ಬೃಹತ್ ಹೋರಾಟ ನಡೆಸಲಿದ್ದೇವೆ ಎಂದರು.
ಬಿಲ್ಲವ, ಈಡಿಗ ಸಮುದಾಯದ ಕುಲಕಸುಬು ಶೇಂದಿಯನ್ನು ದ.ಕ., ಉಡುಪಿ ಸೇರಿದಂತೆ ರಾಜ್ಯಾದ್ಯಂತ 29 ಜಿಲ್ಲೆಗಳಲ್ಲಿ ಬಂದ್ ಮಾಡಿದ್ದಾರೆ. ನಮ್ಮ ಸಮುದಾಯದಲ್ಲಿ 3 ಸಾವಿರ ಮಂದಿಯಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದು, 10 ಸಾವಿರ ಲೈಸೆನ್ಸ್ ಬೇರೆ ಸಮುದಾಯದವರಲ್ಲಿದೆ. ಆದ್ದರಿಂದ ರಾಜ್ಯಾದ್ಯಂತ ಬಿಲ್ಲವ, ಈಡಿಗ ಸಮುದಾಯಕ್ಕೆ ಶೇಂದಿ ಇಳಿಸಿ ಮಾರಾಟ ಮಾಡಲು ಸರಕಾರ ಅನುಮತಿಯನ್ನು ನೀಡಬೇಕು. ಆಗದಿದ್ದರೆ ಸರಕಾರ 13 ಸಾವಿರ ಬಾರ್, ವೈನ್ ಶಾಪ್, ಗುಟ್ಕ ಪಾನ್, ಪಬ್ ಬಂದ್ ಮಾಡಲಿ ಎಂದು ಆಗ್ರಹಿಸಿದರು.
2023ರಲ್ಲಿ ರಾಜ್ಯದ ಮುಖ್ಯಮಂತ್ರಿ ಬಿಲ್ಲವ, ಈಡಿಗ ಸಮುದಾಯದವರೇ ಆಗಲಿದ್ದಾರೆ ಎಂಬುದರಲ್ಲಿ
ಯಾವುದೇ ಅನುಮಾನವಿಲ್ಲ. ಈಗಲೂ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬಿಲ್ಲವ ಸಮುದಾಯಕ್ಕೆ ಹಕ್ಕು ಇದೆ ಎಂದು ಹೇಳಿದರು.